ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ; ಪ್ರಜಾಧ್ವನಿ ಯಾತ್ರೆ ಸೇರಿ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳು ರದ್ದು

 ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

                                                                  ಧ್ರುವನಾರಾಯಣ

By : Rekha.M
Online Desk

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧೆಡೆ ಸಮಾವೇಶಗಳ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಬೇಕಿತ್ತು. ಆದರೆ, ಧ್ರುವನಾರಾಯಣ ಅವರ ಸಾವಿನ ಹಿನ್ನೆಲೆಯಲ್ಲಿ, ಪ್ರಜಾ ಧ್ವನಿ ಯಾತ್ರೆ ರದ್ದಾಗಿದೆ.

ಇಂದು ಹಾಗೂ ನಾಳೆ ರಾಮನಗರ, ಹೊನ್ನಾಳಿ, ಹರಿಹರ, ರಾಣೆಬೆನ್ನೂರುಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮುಂತಾದ ನಾಯಕರು ಭಾಗವಹಿಸಬೇಕಿತ್ತು. ಧ್ರುವನಾರಾಯಣ ಅವರ ಸಾವಿಗೆ ಸಂತಾಪ ಸೂಚಕವಾಗಿ ಇದೀಗ ಈ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಚಾಮರಾಜನಗರದ ಸಂಸದರಾಗಿ ಎರಡು ಬಾರಿ, ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಧ್ರುವನಾರಾಯಣ ಅವರು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ‘ಕಾಯಕ ಯೋಗಿ’ ಎಂದೇ ಗುರುತಿಸಿಕೊಂಡಿದ್ದವರು. 

ಮೂರು ಬಾರಿ ವಿಧಾನಸಭೆಗೆ, ಮೂರು ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದ ಅವರು ನಾಲ್ಕು ಬಾರಿ ಗೆದ್ದಿದ್ದರೆ, ಇನ್ನೆರಡು ಬಾರಿ ಸೋತಿದ್ದರು. 


1999ರಲ್ಲಿ ಅವರು ಬಿಜೆಪಿಯಿಂದ ಸ್ಪರ್ಧಿಸಿ ಎ.ಆರ್‌.ಕೃಷ್ಣಮೂರ್ತಿ ಎದುರು ಸೋಲುಕಂಡಿದ್ದರು. ಆ ಬಳಿಕ ಕಾಂಗ್ರೆಸ್‌ ಸೇರ್ಪಡೆಗೊಂಡು, ರಾಜಕೀಯವಾಗಿ ಉನ್ನತ ಸ್ಥಾನಕ್ಕೆ ಏರುತ್ತಾ ಸಾಗಿದ್ದರು.


Post a Comment

Previous Post Next Post