ವಂಚನೆ ಪ್ರಕರಣ: ಬಿಟಿವಿ ವಾಹಿನಿ ಎಂಡಿ ಕುಮಾರ್‌ಗೆ 14 ದಿನ ನ್ಯಾಯಾಂಗ ಬಂಧನ

 ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಕುಮಾರ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

                                                  ಬಿಟಿವಿ ವಾಹಿನಿ ಎಂಡಿ ಕುಮಾರ್‌

Posted By : Rekha.M
Source : Online Desk

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಕುಮಾರ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಂಚನೆ ಪ್ರಕರಣದ ಆರೋಪಿಯಾಗಿರುವ ಬಿ.ಎಂ. ಕುಮಾರ್‌ನನ್ನು ವಿಜಯನಗರ ಠಾಣೆ ಪೊಲೀಸರು ನಿನ್ನೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಬಿ.ಎಂ. ಕುಮಾರ್‌ನನ್ನು ಮುಂದಿನ ೧೪ ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಿಟಿವಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಅಲಿಯಾಸ್ ಮುನೀಂದ್ರಕುಮಾರ್ ವಿರುದ್ಧ 2020 ರಲ್ಲಿ ಅಶ್ವಿನ್ ಮಹೇಂದ್ರ ಎಂಬುವರು ವಿಜಯನಗರ ಠಾಣೆಗೆ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿತ್ತು.

ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ ಈಗಲ್ ಸೈಟ್ ಮಿಡಿಯಾ ಕಂಪನಿ ಆರಂಭಿಸಿದ್ದರು. ಇಬ್ಬರೂ ಕಂಪನಿ ನಿರ್ದೇಶಕರಾಗಿದ್ದರು. ಆರೋಪಿ ಕುಮಾರ್ ಒಬ್ಬರೇ ಕಾನೂನುಬಾಹಿರವಾಗಿ ಆಡಳಿತ ಮಂಡಳಿ ಸಭೆ ನಡೆಸಿ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಂಡು ಬ್ಯಾಂಕ್ ಖಾತೆ ತೆರೆದು ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದರು ಎಂಬ ಆರೋಪವಿತ್ತು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಂ. ಕುಮಾರ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದರು. ನೋಟಿಸ್ ಜಾರಿಯಾದರೂ ವಿಚಾರಣೆಗೆ ಹಾಜರಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ ಇತ್ತೀಚೆಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಆರೋಪಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ನಿನ್ನೆ ಬಿ.ಎಂ. ಕುಮಾರ್‌ನನ್ನು ಆತನ ಮನೆ ಬಳಿ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಬಿ.ಎಂ. ಕುಮಾರ್‌ನನ್ನು ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


Post a Comment

Previous Post Next Post