ಲೋಕಸಭೆ ಚುನಾವಣೆಯಲ್ಲಿ ಹಿಜಾಬ್, ಧಾರ್ಮಿಕ ವಿಷಯಗಳೇ ಬಿಜೆಪಿಗೆ ಅಸ್ತ್ರ; ಕಾಂಗ್ರೆಸ್‌ಗೆ ಮುಳುವಾಗುತ್ತಾ ಸಿಎಂ ಹೇಳಿಕೆ?

 ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದಕ್ಕೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ವಿವಾದ ಕೇಂದ್ರಬಿಂದುವಾಗಿದೆ. ಈ ವಿಚಾರ ಇಲ್ಲಿಗೆ ಮುಗಿಯದೆ, 2024ರ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟಕ್ಕೆ ನಾಂದಿ ಹಾಡಿರುವಂತಿದೆ.

                       ಹಿಜಾಬ್ ಧರಿಸಿರುವ ಮಹಿಳೆ (ಸಾಂದರ್ಭಿಕ ಚಿತ್ರ) (ಫೋಟೊ-ಎಎಫ್‌ಪಿ)

Posted By : Rekha.M
Source : Online Desk

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದಕ್ಕೆ ಹೇರಲಾಗಿರುವ ನಿಷೇಧವನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ವಿವಾದ ಕೇಂದ್ರಬಿಂದುವಾಗಿದೆ. ಈ ವಿಚಾರ ಇಲ್ಲಿಗೆ ಮುಗಿಯದೆ, 2024ರ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟಕ್ಕೆ ನಾಂದಿ ಹಾಡಿರುವಂತಿದೆ.

ಬಿಜೆಪಿ ನಾಯಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುಖ್ಯಮಂತ್ರಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ. 

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಂಡರೆ ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಲು ಕರೆ ನೀಡುತ್ತೇನೆ ಎಂದಿದ್ದಾರೆ. ಮೈಸೂರು ದೊರೆ ಟಿಪ್ಪು ಸುಲ್ತಾನನ ದ್ವೇಷಿಗಳು ಬ್ರಿಟಿಷರ ಬೂಟು ನೆಕ್ಕುವವರು ಎಂದು ಬಣ್ಣಿಸಿರುವ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಸಿದ್ದರಾಮಯ್ಯನವರ ನಿರ್ಧಾರ ದೇಶದ್ರೋಹಿ ನಿಲುವಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ ಕಾಂಗ್ರೆಸ್ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. 

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ವಿಷಯಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಅದು ಕೆಲಸ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಭಾನುವಾರ ಆರೋಪಿಸಿದ್ದಾರೆ. 

ಪರಮೇಶ್ವರ ಅವರು ಮೇ 10, 2023 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದರು. ಇದರಲ್ಲಿ ಕೊನೆಯ ಕ್ಷಣದಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಸೇರಿಸಲಾಯಿತು. ಇದು ಕೂಡ ವಿವಾದವನ್ನು ಹುಟ್ಟುಹಾಕಿತು. ಖಾತರಿ ಯೋಜನೆಗಳ ಜೊತೆಗೆ ಇದು ಕೂಡ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿತು ಮತ್ತು ಮುಸ್ಲಿಮರು ಕಾಂಗ್ರೆಸ್‌ಗೆ ಹೆಚ್ಚಿನ ಮತ ಹಾಕಿದರು. ಇದರಿಂದಾಗಿ 135 ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿತು.

'ಮುಸ್ಲಿಮರು ಈಗಾಗಲೇ ಕಾಂಗ್ರೆಸ್ ಪರವಾಗಿ ಧ್ರುವೀಕರಣಗೊಂಡಿರುವುದರಿಂದ, ಹಿಜಾಬ್ ಮೇಲಿನ ನಿಷೇಧವನ್ನು ಹಿಂಪಡೆಯುವಂತಹ ಧಾರ್ಮಿಕ ವಿಷಯಗಳು ಆ ಪಕ್ಷಕ್ಕೆ ಹೆಚ್ಚು ಸಹಾಯ ಮಾಡುವುದಿಲ್ಲ. ಬದಲಾಗಿ, ಲೋಕಸಭೆ ಚುನಾವಣೆಯಲ್ಲಿ ಹಿಂದೂಗಳನ್ನು ಬಿಜೆಪಿಯತ್ತ ತಳ್ಳುವ ಆಯುಧವಾಗಿ ಕೆಲಸ ಮಾಡಬಹುದು' ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಹೇಳಿಕೆ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಕುತೂಹಲ ಮೂಡಿಸಿದೆ.



Post a Comment

Previous Post Next Post